ಬೆಂಗಳೂರು (ಅ.07): ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವ ಸಲುವಾಗಿ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 10 ದಿನ ಕಾಲಾವಕಾಶ ಬೇಕೆಂದು ರಾಜ್ಯ ಶಿಕ್ಷಕರ ಸಂಘ ಸಿಎಂಗೆ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ಆಕ್ಟೋಬರ್ 18 ರವರೆಗೆ ಸರ್ಕಾರಿ ಶಾಲೆ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾತಿಗಣತಿ ಸಮೀಕ್ಷೆ ಇನ್ನೂ ಮುಕ್ತಾಯವಾಗಿಲ್ಲ ಎಂದು ಹೇಳಿದರು. “ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇಕಡಾ 90ರಷ್ಟು ಪೂರ್ಣಗೊಂಡಿದೆ. ಆದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದು ಕೇವಲ ಶೇಕಡಾ 68-69ರಷ್ಟು ಮಾತ್ರ ಪೂರ್ಣಗೊಂಡಿದೆ. ಇಂದು ಸಂಜೆಯೊಳಗೆ ರಾಜ್ಯಾದ್ಯಂತ ಜಾತಿಗಣತಿಯ ಸಂಪೂರ್ಣ ವಿವರ ಬರಲಿದೆ,” ಎಂದು ಅವರು ತಿಳಿಸಿದರು.
ಜಾತಿಗಣತಿ ಸಮೀಕ್ಷೆಯ ಕಾರ್ಯವು ರಾಜ್ಯದಾದ್ಯಂತ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ಕೆ ಶಿಕ್ಷಕರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸರ್ಕಾರ ಯೋಜನೆ ರೂಪಿಸಿದೆ. ಈ ಹಿನ್ನೆಲೆಯಲ್ಲಿ, ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. “ಶಿಕ್ಷಕರು ಜಾತಿಗಣತಿಯಂತಹ ಮಹತ್ವದ ಕಾರ್ಯದಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ, ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ರಜೆ ಘೋಷಿಸಲಾಗಿದೆ,” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

