ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಎಸ್ಪಿ ಎಸ್.ಎಸ್.ಕಾಶಿ ನೀಡಿರುವ ದೂರು ಕುರಿತ ಮಾಧ್ಯಮಗಳ ಪ್ರಶ್ನೆಗೆ ಡಿಜಿಪಿ ಸಲೀಂ ಅವರು ನೇರ ಉತ್ತರ ನೀಡಲಿಲ್ಲ. ಆದರೆ ಒಂದು ವರ್ಷದಿಂದ ಮಂಗಳೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿದೆ, ಅದು ಮುಂದುವರಿಯಬೇಕು ಎಂದು ಉತ್ತರಿಸಿದ್ದಾರೆ.
ನಗರಕ್ಕೆ ಆಗಮಿಸಿದ್ದ ಡಿಜಿಪಿ ಸಲೀಂ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರ ವಿರುದ್ಧ ಎಸ್ಪಿ ಎಸ್.ಎಸ್.ಕಾಶಿಯವರು ನೀಡಿರುವ ದೂರಿನ ಬಗೆಗಿನ ಮಾಧ್ಯಮದವರ ಪ್ರಶ್ನೆಗೆ ಸಲೀಂ ಉತ್ತರಿಸದೆ ಹೊರಟು ಹೋದರು.

ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದೇನೆ. ಕಳೆದ ಒಂದು ವರ್ಷದಿಂದ ಇಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದನ್ನೇ ಮುಂದುವರೆಸಿಕೊಂಡು ಹೋಗಿ ಎಂದು ಹೇಳಿದ್ದೇನೆ ಎಂದರು.
ಉತ್ತರ ಕರ್ನಾಟಕ ಭಾಗದ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗಾವಣೆ ವಿಚಾರದಲ್ಲಿ ತಮಗೆ ಮನವಿ ನೀಡಿದ್ದಾರೆ. ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. 15% ರಂತೆ ಹಂತಹಂತವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಡಿಜಿಪಿ ಸಲೀಂ ಹೇಳಿದರು.

