ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 125 ವರ್ಷಗಳಷ್ಟು ಹಳೆಯದಾದ ಐತಿಹಾಸಿಕ ಪವಿತ್ರ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಅನ್ನು ಸ್ಥಳೀಯ ಉದ್ಯಮಿಯೊಬ್ಬರು ಅಕ್ರಮವಾಗಿ ಕೆಡವಿ ಹಾಕಿದ್ದಾರೆ. ಲಾಹೋರ್ನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಫಾರೂಕಾಬಾದ್ನಲ್ಲಿ ಜೂನ್ 24 ರ ರಾತ್ರಿ ನಡೆದಿರುವ ಈ ಕೃತ್ಯವು ಅಲ್ಲಿನ ಅಲ್ಪಸಂಖ್ಯಾತ ಸಿಖ್ ಸಮುದಾಯದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಭಾರತ ಸರ್ಕಾರವೂ ಈ ಧ್ವಂಸ ಕೃತ್ಯವನ್ನು ಬಲವಾಗಿ ಖಂಡಿಸಿದೆ.
ಉದ್ಯಮಿಯು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಈ ಕಟ್ಟಡವನ್ನು ನೆಲಸಮಗೊಳಿಸಿದ್ದಾನೆ. ಸ್ಥಳೀಯ ಸಿಖ್ಖರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಬಳಿಕವಷ್ಟೇ ಪಾಕಿಸ್ತಾನದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರ್ಯಮ್ ನವಾಜ್ ಅವರ ಸೂಚನೆ ಮೇರೆಗೆ ಅಲ್ಪಸಂಖ್ಯಾತ ಸಚಿವ ರಮೇಶ್ ಸಿಂಗ್ ಅರೋರಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಅವರು, ಗುರುದ್ವಾರದ ಪುನಃಸ್ಥಾಪನೆ ಕೆಲಸವನ್ನು ತಕ್ಷಣವೇ ಆರಂಭಿಸುವುದಾಗಿ ಘೋಷಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಿಖ್ ದೇವಾಲಯದ ಮೇಲೆ ನಡೆದಿರುವ ಈ ವಿಧ್ವಂಸಕ ಕೃತ್ಯ ಅತ್ಯಂತ ಶೋಚನೀಯವಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದಿದ್ದಾರೆ.
ಈ ಹೇಯ ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕು ಹಾಗೂ ಧ್ವಂಸಗೊಳಿಸಲಾದ ಗುರುದ್ವಾರದ ಭಾಗಗಳನ್ನು ಪಾಕಿಸ್ತಾನ ಸರ್ಕಾರವೇ ಸ್ವತಃ ತಕ್ಷಣವೇ ಪುನರ್ನಿರ್ಮಿಸಿಕೊಡಬೇಕು ಎಂದು ಭಾರತ ಆಗ್ರಹಿಸಿದೆ.

