ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ಹಾಗೂ ಹಾಪ್ಕಾಮ್ಸ್ ಉದ್ಯೋಗಿ ರವಿ ಶೆಟ್ಟಿ (ಅಶೋಕ್ ನಗರ) ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ (ಜು. 21) ಮುಂಜಾನೆ ನಿಧನರಾದರು.
ತಿರುಪತಿ ಯಾತ್ರೆ ಮುಗಿಸಿ ಮಂತ್ರಾಲಯದತ್ತ ತೆರಳುತ್ತಿದ್ದ ವೇಳೆ, ಮಂತ್ರಾಲಯ ಸಮೀಪ ಕೇವಲ ಒಂದೆರಡು ಕಿಲೋಮೀಟರ್ ದೂರದಲ್ಲಿ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅದೇ ಕಾರಿನಲ್ಲಿದ್ದ ಪುರುಷೋತ್ತಮ ಭಂಡಾರಿ, ಸುದೇಶ್ ರೈ ಹಾಗೂ ಪ್ರದೀಪ್ ಆಳ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರವಿ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಫೌಂಡೇಷನ್ನ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಲ್ಲದೆ, ಹಲವಾರು ಸಾಮಾಜಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ವಲಯದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

