ಮಂಗಳೂರು: ಕುಳಾಯಿಯ ನೂತನ ಇಸ್ಕಾನ್ ದೇವಸ್ಥಾನದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ಮೂರು ದಿನಗಳ ಕಾಲ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕುಳಾಯಿ ಇಸ್ಕಾನ್ ದೇವಸ್ಥಾನದ ಅಧ್ಯಕ್ಷ ಹಾಗೂ ಜನರಲ್ ಮ್ಯಾನೇಜರ್ ನಾಮ ನಿಷ್ಠ ದಾಸ್ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಗವದ್ಗೀತೆಯ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಹೋತ್ಸವದ ಅಂಗವಾಗಿ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಎ.ಸಿ.ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ ಜೀವನ ಹಾಗೂ ಸಂದೇಶವನ್ನು ಪರಿಚಯಿಸುವ ವಿಶೇಷ ಪ್ರದರ್ಶನ ಮತ್ತು ಭಗವದ್ಗೀತೆಯ ಮೂಲ ತತ್ವಗಳನ್ನು ವಿವರಿಸುವ ದೃಶ್ಯ ಪ್ರದರ್ಶನಗಳನ್ನು ಉದ್ಘಾಟಿಸಲಾಗುವುದು.
ದೇವಸ್ಥಾನದ ಆವರಣದಲ್ಲಿ ನೂತನ ಸಾರ್ವಜನಿಕ ಕಾರಂಜಿ ಹಾಗೂ ವಿಸ್ತರಿತ ಗೋಶಾಲೆಯನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಗುವುದು. ಭಗವದ್ಗೀತೆಯ ವ್ಯವಸ್ಥಿತ ಅಧ್ಯಯನಕ್ಕಾಗಿ ಐದು ಅಂತಸ್ತಿನ ವಸತಿ ಕಾಲೇಜು ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದ್ದು, ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಮೂರು ದಿನಗಳ ಕಾಲ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಭಿಷೇಕ, ಭಜನೆ, ಆರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ನಾಟಕ, ಭರತನಾಟ್ಯ ಹಾಗೂ ಯಕ್ಷಗಾನ ಸೇರಿದಂತೆ ವಿವಿಧ ಸಾಂಪ್ರದಾಯಿಕ ಕಲಾ ಪ್ರದರ್ಶನಗಳು ನಡೆಯಲಿವೆ.
ಮಹೋತ್ಸವದ ಮೂರು ದಿನಗಳಲ್ಲೂ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನೂತನ ಸೌಲಭ್ಯಗಳನ್ನು ವೀಕ್ಷಿಸುವುದರೊಂದಿಗೆ ಉಚಿತ ಪ್ರಸಾದ ಸ್ವೀಕರಿಸಬಹುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸರ್ವನಾಥ ಗೀತಾಯಿ ದಾಸ್ ಹಾಗೂ ಶ್ರಿವಾಸ್ ದಾಸ್ ಉಪಸ್ಥಿತರಿದ್ದರು.

