ಮಂಗಳೂರು: ರಾಮಕ್ಷತ್ರಿಯ ಸಮಾಜ ಬಾಂಧವರು ಸೇರಿ 1997ರಲ್ಲಿ ಸ್ಥಾಪಿಸಿದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ.) ಸಹಕಾರ ಕ್ಷೇತ್ರದಲ್ಲಿ ಯಶಸ್ವಿ ಪಯಣ ಮುಂದುವರಿಸುತ್ತಿದ್ದು, ಸಂಘದ 7ನೇ ನೂತನ ಶಾಖೆ ಸೆಪ್ಟೆಂಬರ್ 6ರಂದು ಮೂಡುಬಿದಿರೆಯಲ್ಲಿ ಉದ್ಘಾಟನೆಯಾಗಲಿದೆ.
ಸುಮಾರು 29 ವರ್ಷಗಳ ಯಶಸ್ವಿ ಪಯಣ ಪೂರ್ಣಗೊಳಿಸಿರುವ ಸಂಘವು ಪ್ರಸ್ತುತ ಸುಮಾರು ₹500 ಕೋಟಿ ವಹಿವಾಟಿನ ಸಮೀಪದಲ್ಲಿದೆ.
ಮೂಡುಬಿದಿರೆಯ ಸರ್ಕಾರಿ ಆಸ್ಪತ್ರೆ ರಸ್ತೆಯ ಪ್ರಭು ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ನೂತನ ಶಾಖೆ ಕಾರ್ಯಾರಂಭಗೊಳ್ಳಲಿದ್ದು, ಸೆಪ್ಟೆಂಬರ್ 6ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಂಘದ ಅಧ್ಯಕ್ಷ ಹಾಗೂ ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್ ಅವರ ಅಧ್ಯಕ್ಷತೆ ಮತ್ತು ನಾಯಕತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಹಾಗೂ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಪ್ರೇಮಾನಂದ ಕೆ.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಉಪಾಧ್ಯಕ್ಷ ಕೆ. ದಿನೇಶ್ ರಾವ್, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದನ್ ಕೋಟೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


