ಮಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ನ ಗೆಲುವಿನ ಗತವೈಭವವನ್ನು ಮರಳಿ ತರುವುದೇ ತಮ್ಮ ಮೊದಲ ಆದ್ಯತೆ ಎಂದು ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ಪಕ್ಷದ ಹಿನ್ನಡೆಯನ್ನು ಪುನರ್ವಿಮರ್ಶಿಸಿ, ತಳಮಟ್ಟದಿಂದ ಪಕ್ಷ ಸಂಘಟನೆ ಬಲಪಡಿಸಲಾಗುವುದು. ಹಿರಿಯ-ಕಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರಾಮ ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಸಂಪರ್ಕಿಸಿ ಸಂಘಟನೆಗೆ ಹೊಸ ಚೈತನ್ಯ ನೀಡಲಾಗುವುದು ಎಂದರು.

ಜಿಲ್ಲಾಧ್ಯಕ್ಷ ಸ್ಥಾನ ಅಧಿಕಾರದ ಕುರ್ಚಿಯಲ್ಲ, ಕಾರ್ಯಕರ್ತರ ಪರಿಶ್ರಮಕ್ಕೆ ದೊರೆತ ಗೌರವ. ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕುವ ಸಾಮಾನ್ಯ ಸೇವಕನಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರನ್ನೂ ಒಗ್ಗೂಡಿಸಿ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ನ್ನು ಮತ್ತೊಮ್ಮೆ ಅಜೇಯ ಶಕ್ತಿಯನ್ನಾಗಿ ಕಟ್ಟುವುದು ಸಂಕಲ್ಪ ಎಂದರು.
ಸುದ್ದಿಗೋಷ್ಠಿಯಲ್ಲಿ ಮೂಡ ಅಧ್ಯಕ್ಷ ಸಂತೋಷ್ ಕುಮಾರ್, ಪ್ರಮುಖರಾದ ಅಪ್ಪಿ ಸಲಿಂ ಅಹ್ಮದ್, ನೀರಜ್ಪಾಲ್, ಸುಹಾನ್ ಆಳ್ವಾ, ಚಿತ್ತರಂಜನ್ ಶೆಟಿ, ಸುಭಾಶ್ಚಂದ್ರ ಶೆಟ್ಟಿ, ಲಾರೆನ್ಸ್ ಡಿಸೋಜಾ, ಬಶೀರ್, ಪದ್ಮನಾಭ ಕೋಟ್ಯಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .

